ಚಿತ್ರದುರ್ಗ:
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಕರ್ನಾಟಕ ಟೈಕ್ವಾಂಡೋ ಅಸೋಸಿಯೇಷನ್ (ರಿ) ಹಾಗೂ ಚಿತ್ರದುರ್ಗ ಜಿಲ್ಲಾ ಟೈಕ್ವಾಂಡೋ ಸಂಸ್ಥೆಯ ಆಶ್ರಯದಲ್ಲಿ ಆಗಸ್ಟ್ 8 ಮತ್ತು 9ರಂದು ಚಿತ್ರದುರ್ಗದಲ್ಲಿ 41ನೇ ರಾಜ್ಯಮಟ್ಟದ ಟೈಕ್ವಾಂಡೋ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಶ್ರೀ ವಿನಾಯಕ ಕಲ್ಯಾಣ ಮಂಟಪದಲ್ಲಿ ಈ ಕ್ರೀಡಾಕೂಟ ನಡೆಯಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಟೈಕ್ವಾಂಡೋ ಸಂಸ್ಥೆಯ ಖಜಾಂಚಿ ಹಾಗೂ ಸಹ ಕಾರ್ಯದರ್ಶಿ ಶ್ರೀಮತಿ ಎಂ. ಅನಿತಾ ಮಹಂತೇಶ್, ಸಬ್-ಜ್ಯೂನಿಯರ್, ಜ್ಯೂನಿಯರ್, ಸೀನಿಯರ್, 10ನೇ ಕೆಡೆಟ್ ಕ್ಯುರುಗಿ, 14ನೇ ಪೂಮ್ಸೆ ಹಾಗೂ 3ನೇ ಪ್ಯಾರಾ ಟೈಕ್ವಾಂಡೋ ವಿಭಾಗಗಳಲ್ಲಿ ಸ್ಪರ್ಧೆಗಳು ಜರುಗಲಿವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೆಪಿಎಸ್ಸಿ ಭ್ರಷ್ಟಾಚಾರದ ಕೂಪ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಬಿ.ಸಿ. ಹನುಮಂತೇಗೌಡ ಆಕ್ರೋಶ
ಕಾರ್ಯಕ್ರಮದ ಪ್ರಮುಖಾಂಶಗಳು:
- ಉದ್ಘಾಟನೆ ಮತ್ತು ಅಧ್ಯಕ್ಷತೆ: ಆಗಸ್ಟ್ 8ರ ಶನಿವಾರ ಬೆಳಿಗ್ಗೆ 10:30ಕ್ಕೆ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್ ಅವರು ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದು, ಶಾಸಕರಾದ ಕೆ.ಸಿ. ವೀರೇಂದ್ರ (ಪಪ್ಪಿ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
- ಗಣ್ಯರ ಉಪಸ್ಥಿತಿ: ಎಸ್ಪಿ ರಂಜಿತ್ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಡಿವೈಎಸ್ಪಿ ಶ್ರೀನಿವಾಸ್ ಜೆ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಸುಚೇತಾ ಎಂ. ನೆಲವಿಗೆ ಸೇರಿದಂತೆ ಹಲವು ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
- ಕ್ರೀಡಾಪಟುಗಳ ಭಾಗಿ: ಈ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ದಾವಣಗೆರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ವಿಜಯಪುರ ಹಾಗೂ ಆತಿಥೇಯ ಚಿತ್ರದುರ್ಗ ಜಿಲ್ಲೆಗಳಿಂದ ಸುಮಾರು 400ಕ್ಕೂ ಹೆಚ್ಚು ಕ್ರೀಡಾಪಟುಗಳು ಸೆಣಸಾಡಲಿದ್ದಾರೆ.
ರಾಜ್ಯ ಮತ್ತು ಜಿಲ್ಲಾ ಟೈಕ್ವಾಂಡೋ ಸಂಸ್ಥೆಯ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ಕೋರಲಾಗಿದೆ.