
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಮಾರ್ಚ್.27): ನಾವು ನೀಡಿದ ಆಶ್ವಾಸನೆಯಂತೆ ರಾಜ್ಯದ ಲಂಬಾಣಿ, ಕುರುಬ, ಗೊಲ್ಲರಹಟ್ಟಿ, ತಾಂಡಾಗಳು ಹಾಗೂ ನಗರದ ಕೊಳಚೆ ಪ್ರದೇಶದಲ್ಲಿ ವಾಸವಿದ್ದ ಜನರಿಗೆ ಶಾಶ್ವತ ಹಕ್ಕು ಪತ್ರಗಳನ್ನು ಸರ್ಕಾರದಿಂದ ನೀಡಲಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ನಗರದ ತ.ರಾ.ಸು ರಂಗಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಹೊಸದಾಗಿ ರಚಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು.
ಬಹುಕಾಲದಿಂದಲೂ ಪೂರ್ವಜರಿಂದ ಬಳುವಳಿಯಾಗಿ ಬಂದ ಜಾಗದಲ್ಲಿ ನೀವೆಲ್ಲಾ ವಾಸವಿದ್ದಿರಿ. ಇದು ಕಂದಾಯ ಇಲಾಖೆ ಮ್ಯಾಪ್ನಲ್ಲಿ ನಮೂದಾಗದ ಕಾರಣ ಈ ಜಾಗದ ಹಕ್ಕು ನಿಮಗೆ ಲಭಿಸಿರಲಿಲ್ಲ. ಆದರೆ ಇಂದು ಸರ್ಕಾರ ಈ ಜಾಗದ ಹಕ್ಕು ಶಾಶ್ವತವಾಗಿ ನಿಮಗೆ ನೀಡಿದೆ.
ಇದರ ಜೊತೆಗೆ ಈ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನೂ ಕಲ್ಪಿಸಲಾಗಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸಬಾ ಹಾಗೂ ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಒಟ್ಟು 20 ಹಳ್ಳಿಗಳ 1781 ಕುಟುಂಬಗಳಿಗೆ ಇಂದು ಶಾಶ್ವತ ಹಕ್ಕುಪತ್ರ ನೀಡಲಾಗಿದೆ ಎಂದರು.
ಪ್ರಧಾನ ಮಂತ್ರಿಗಳು ಕಲಬುರ್ಗಿಯಲ್ಲಿ ಜರುಗಿದ ಕಾರ್ಯದಲ್ಲಿ ಉತ್ತರ ಕರ್ನಾಟಕ ಭಾಗದ 52 ಸಾವಿರ ಜನರಿಗೆ ಹಕ್ಕು ಪತ್ರ ವಿತರಿಸಿದ್ದರು. ಇದು ಗಿನ್ನಿಸ್ ದಾಖಲೆಯಾಗಿದೆ. ಇದೇ ಮಾದರಿಯಲ್ಲಿ ದಕ್ಷಿಣ ಕರ್ನಾಟಕ ಭಾಗದ ಜನರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಂದ ಹಕ್ಕು ಪತ್ರ ವಿತರಿಸಲು ಕಾರ್ಯಕ್ರಮ ರೂಪಿಸಲಾಗಿತ್ತು. ಕೇಂದ್ರ ಗೃಹ ಸಚಿವರ ಸಮಯ ನಿಗದಿಯಾಗದ ಕಾರಣ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶದಂತೆ ತಾಲ್ಲೂಕುವಾರು ಹಕ್ಕುಪತ್ರ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಧಿಕಾರಿ ಆರ್.ಚಂದ್ರಯ್ಯ, ಭೂ ದಾಖಲೆಗಳ ಉಪನಿರ್ದೇಶಕ ರಾಮಾಂಜನೇಯ, ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ, ತಾಲ್ಲೂಕು ಪಂಚಾಯಿತಿ ಇಒ ಹನುಮಂತಪ್ಪ, ಚಿತ್ರದುರ್ಗ ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ ನಾರಾಯಣಸ್ವಾಮಿ, ನಗರಸಭೆ ಆಯುಕ್ತ ಶ್ರೀನಿವಾಸ ಸೇರಿದಂತೆ ಮತ್ತಿತರರು ಇದ್ದರು.
The post 1781 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ : ನೀಡಿದ ಆಶ್ವಾಸನೆಯಂತೆ ಹಕ್ಕುಪತ್ರ ವಿತರಣೆ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/isJdZy2
via IFTTT