“ನವರಾತ್ರಿಗೆ ದೇಗುಲ ನೋಡ ಬನ್ನಿ”: ಮಂಗಳೂರಿನಲ್ಲಿ ಕೆಎಸ್‌ಆರ್​ಟಿಸಿಯಿಂದ ವಿಶೇಷ ಆಫರ್

ಮಂಗಳೂರಿನ ಕೆಎಸ್​ಆರ್​ಟಿಸಿ ಇಲಾಖೆಯು ಕಳೆದ ಬಾರಿಯಂತೆ ಈ ಬಾರಿಯೂ ದಸರಾ ಹಿನ್ನೆಲೆ ಭಕ್ತರಿಗಾಗಿ ಸ್ಪೆಷಲ್​ 4 ದೇಗುಲ ದರ್ಶನ ಪ್ಯಾಕೇಜ್​ ನೀಡುತ್ತಿದ್ದು ವಿವರ ಈ ಕೆಳಗಿನಂತಿದೆ.

ಮಂಗಳೂರು: ನವರಾತ್ರಿಯ ದಿನಗಳಲ್ಲಿ ಹೆಚ್ಚಿನ ಭಕ್ತರು ದೇವಿ ದೇವಾಲಯಗಳ ದರ್ಶನ ಮಾಡುವುದು ಸಾಮಾನ್ಯ. ದೇಗುಲ ದರ್ಶನ ಮಾಡುವ ಭಕ್ತರಿಗೆಂದೆ ಮಂಗಳೂರಿನಲ್ಲಿ ಕೆಎಸ್‌ಆರ್​ಟಿಸಿ ದಸರಾ ದೇಗುಲ ದರ್ಶನ ವಿಶೇಷ ಪ್ಯಾಕೇಜ್​ ಅನ್ನು ಘೋಷಿಸಿದೆ. ಕಳೆದ ಬಾರಿ ಈ ಯೋಜನೆ ಯಶಸ್ವಿಗೊಂಡಿದ್ದ ಹಿನ್ನೆಲೆಯಲ್ಲಿ ಈ ಬಾರಿಯೂ ದೇಗುಲ ದರ್ಶನ ಪ್ಯಾಕೇಜ್​ನ್ನು ಮುಂದುವರಿಸಿದೆ.

ಈ ಕುರಿತು, ಕೆಎಸ್​ಆರ್​ಟಿಸಿ ಮಂಗಳೂರು ವಿಭಾಗೀಯ ಅಧಿಕಾರಿ ರಾಜೇಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಈ ಬಾರಿಯ ದಸರಾಗೆ ಮಂಗಳೂರು ಕೆಎಸ್​ಆರ್​ಟಿಸಿಯಿಂದ ನಾಲ್ಕು ವಿಶೇಷ ಪ್ಯಾಕೇಜ್​ಗಳಿವೆ. ಒಂದನೇ ಪ್ಯಾಕೇಜ್​ನಲ್ಲಿ ದಸರಾ ದರ್ಶಿನಿ ಮೂಲಕ ಮಂಗಳೂರಿನ ಒಂಬತ್ತು ದೇವಿ ದೇಗುಲಗಳ ದರ್ಶನ ಮಾಡಿಸಲಾಗುತ್ತದೆ‌. ಈ ಪ್ಯಾಕೆಜ್​ನಲ್ಲಿ ಮಂಗಳಾದೇವಿ, ಪೊಳಲಿ, ಸುಂಕದಕಟ್ಟೆ, ಕಟೀಲು, ಬಪ್ಪನಾಡು, ಸಸಿಹಿತ್ಲು, ಚಿತ್ರಾಪುರ, ಉರ್ವ ಮಾರಿಯಮ್ಮ ಹಾಗೂ ಕುದ್ರೋಳಿ ದೇವಾಲಯಗಳ ದರ್ಶನ ಮಾಡಿಸಲಾಗುತ್ತದೆ. ಈ ಪ್ಯಾಕೇಜ್​​ಗೆ ದರ ನೋಡುವುದಾದರೆ ನರ್ಮ್​ ಬಸ್​ನಲ್ಲಿ ಪ್ರತೀ ಪ್ರಯಾಣಿಕನಿಗೆ 400ರೂ. ಟಿಕೆಟ್​ ದರ ಇದ್ದರೆ, ವೋಲ್ವೋ ಬಸ್​ಗೆ 500 ರೂ. ದರ ವಿಧಿಸಲಾಗಿದೆ. 6 ರಿಂದ 12 ವರ್ಷಗಳ ಮಕ್ಕಳಿಗೆ 300 ರೂ. ದರ ವಿಧಿಸಲಾಗಿದೆ.

ಅದೇ ರೀತಿ 2ನೇ ಪ್ಯಾಕೇಜ್​ ಪಂಚದುರ್ಗಾ ದರ್ಶನದಲ್ಲಿ, ದುರ್ಗಾಪರಮೇಶ್ವರಿ ದೇವಾಲಯಗಳ ದರ್ಶನ ಮಾಡಿಸಲಾಗುತ್ತದೆ‌. ತಲಪಾಡಿ, ಕಟೀಲು, ಮುಂಡ್ಕೂರು, ಬಪ್ಪನಾಡು, ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಗಳ ದರ್ಶನ ಅವಕಾಶ ಕಲ್ಪಿಸಲಾಗಿದೆ. ನರ್ಮ್ ಬಸ್​ನಲ್ಲಿ ವಯಸ್ಕರಿಗೆ 400 ರೂ. ದರವಿದೆ. 3ನೇ ಪ್ಯಾಕೇಜ್​ನಲ್ಲಿ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ, ಕೊಲ್ಲೂರು ಮೂಕಾಂಬಿಕಾ, ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರಿ, ಉಚ್ಚಿಲ ಮಹಾಲಕ್ಷ್ಮಿ ದೇಗುಲ ದರ್ಶನ ಮಾಡಿಸಲಾಗುತ್ತದೆ‌. ಇದಕ್ಕೆ ಓರ್ವ ಪ್ರಯಾಣಿಕನಿಗೆ 500 ರೂ. ದರ ವಿಧಿಸಲಾಗಿದೆ. ಹಾಗೇ ಮಡಿಕೇರಿಯ 4ನೇ ಪ್ಯಾಕೇಜ್​ನಲ್ಲಿ ರಾಜಾಸೀಟ್, ಅಬ್ಬಿಪಾಲ್ಸ್, ಗೋಲ್ಡನ್ ಟೆಂಪಲ್, ಹಾರಂಗಿ ಡ್ಯಾಂಗಳಿಗೆ ಕರೆದೊಯ್ಯಲಾಗುತ್ತದೆ. ವಯಸ್ಕರಿಗೆ 500 ರೂ. ದರ ವಿಧಿಸಲಾಗಿದೆ.

ಮಂಗಳೂರಿನ ಸುತ್ತಮುತ್ತಲಿನ ದೇವಾಲಯಗಳಿಗೆ ವೋಲ್ವೊ, ನರ್ಮ್​ ಬಸ್​ಗಳಲ್ಲಿ ವಿಶೇಷ ಪ್ಯಾಕೇಜ್ ಹಮ್ಮಿಕೊಳ್ಳಲಾಗಿದೆ. ಅ.15 – 24ರವರೆಗೆ ಈ ನಾಲ್ಕು ಪ್ಯಾಕೇಜ್ ಇರಲಿದೆ‌. ಜನರ ಬೇಡಿಕೆ ಹೆಚ್ಚಿದ್ದಲ್ಲಿ ಅ.30ರವರೆಗೆ ವಿಸ್ತರಿಸಲಾಗುತ್ತದೆ. 25 ಕೆಎಸ್‌ಆರ್​ಟಿಸಿ ಬಸ್​ಗಳನ್ನು ಈ ವಿಶೇಷ ಪ್ಯಾಕೇಜ್​ಗೆ ಮೀಸಲಿರಿಸಲಾಗುತ್ತದೆ. ಆದರೆ ಶಕ್ತಿ ಯೋಜನೆ ಇದಕ್ಕೆ ಅನ್ವಯವಾಗುವುದಿಲ್ಲ. ಎಲ್ಲರೂ ಪೂರ್ಣ ದರ ನೀಡಿಯೇ ಪ್ರಯಾಣಿಸಬೇಕಾಗುತ್ತದೆ. ಒಟ್ಟಿನಲ್ಲಿ ಕೆಎಸ್‌ಆರ್​ಟಿಸಿ ಒಂದೇ ದಿನದಲ್ಲಿ ಹಲವಾರು ದೇಗುಲಗಳ ದರ್ಶನಗಳಿಗೆ ಅವಕಾಶ ನೀಡಿರುವುದು ವಿಶೇಷವೆನಿಸಿದೆ.

ಕೆಎಸ್‌ಆರ್ ಟಿಸಿ ಮಂಗಳೂರು ವಿಭಾಗೀಯ ಅಧಿಕಾರಿ ರಾಜೇಶ್ ಶೆಟ್ಟಿ ಮಾತನಾಡಿ ದಸರಾ ಪ್ಯಾಕೇಜ್ ಆರಂಭಿಸಲಾಗಿದ್ದು ಅ.15 ರಿಂದ 25 ರವರೆಗೆ ಇರುತ್ತದೆ. ಬೇಡಿಕೆ ಇದ್ದರೆ ಅದನ್ನು ಅ.30 ರವರೆಗೆ ವಿಸ್ತರಿಸಲಾಗುವುದು. ಈ ಬಾರಿ ನಾವು ನಾಲ್ಕು ಪ್ಯಾಕೆಜ್ ತಂದಿದ್ದೇವೆ. ಈ ಪ್ಯಾಕೇಜ್​ಗಳು ಶಕ್ತಿ ಯೋಜನೆ ಅಡ್ಡಿ ಬರುವುದಿಲ್ಲ. ಈ ಎಲ್ಲ ಪ್ಯಾಕೇಜ್​ಗಳು ಒಂದು ದಿನದೊಳಗೆ ಮುಗಿಸುವಂತಹ ಪ್ಯಾಕೇಜ್. ಕಳೆದ ವರ್ಷ ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಜನರ ಸ್ಪಂದನೆ ಇತ್ತು. ಮೈಸೂರು ಬಿಟ್ಟರೆ ರಾಜ್ಯದ ಬೇರೆ ಎಲ್ಲಿಯೂ ಇಂತಹ ದರ್ಶನದ ಪ್ಯಾಕೇಜ್​ಗಳಿಲ್ಲ ಎಂದು ಹೇಳಿದರು.

Source : https://m.dailyhunt.in/news/india/kannada/etvbhar9348944527258-epaper-etvbhkn/+navaraatrige+degula+noda+banni+mangalurinalli+keesaar+tisiyindha+vishesha+aafar-newsid-n545806368?listname=newspaperLanding&index=20&topicIndex=0&mode=pwa&action=click

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

 WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *