
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ(ಜ.26) : ಭಿನ್ನತೆಯಲ್ಲಿ ಏಕತೆಯನ್ನು ಸಾಧಿಸಿದ ರಾಷ್ಟ್ರ ಭಾರತವಾಗಿದೆ. ಸಂವಿಧಾನದಿಂದಾಗಿ ದೇಶಕ್ಕೆ ಭದ್ರ ಬುನಾದಿ ಲಭಿಸಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ನಗರದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ 74ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಬಳಿಕ ಮಾತನಾಡಿದರು.
ಸಂವಿಧಾನ ರಚನೆ ಪೂರ್ಣಗೊಳಿಸಲು 2 ವರ್ಷ 11 ತಿಂಗಳು ಬೇಕಾಯಿತು. ಈ ಸಂವಿಧಾನ 1950 ಜನವರಿ 26 ರಂದು ಜಾರಿಗೆ ಬಂದಿತು. ಇದರ ನೆನಪಿಗಾಗಿ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಅಚರಣೆ ಮಾಡಲಾಗುತ್ತಿದೆ. ಪ್ರಜೆಗಳು ಆಳುವವರನ್ನು ಆಯ್ಕೆ ಮಾಡುತ್ತಾರೆ. ಈ ಮೂಲಕ ಪ್ರಜೆಗಳೇ ಸ್ವತಃ ಆಡಳಿತ ನಡೆಸುವ ಮಾದರಿ ದೇಶದಲ್ಲಿದೆ.
ಚಿತ್ರದುರ್ಗ ಐತಿಹಾಸಿಕ ನಗರ, ವೀರಮದಕರಿ ಆಳಿದ ನಾಡು. ಇಲ್ಲಿನ ಒನಕೆ ಓಬವ್ವ ನಾಡಿಗೆ ಮಾದರಿಯಾಗಿದ್ದಾಳೆ. ದೇಶದ ಆರ್ಥಿಕತೆ ಅಭಿವೃದ್ಧಿ ಹೊಂದುತ್ತಿದ್ದು ಇಂದು ಜಗತ್ತಿನ 3ನೇ ಅತಿ ದೊಡ್ಡ ಆರ್ಥಿಕತೆಯಾಗಿ ಸ್ಥಾನಕ್ಕೆ ಪಡೆದುಕೊಂಡಿದೆ. ಕೋವಿಡ್ ಮಹಾಮಾರಿಗೆ ದೇಶದಲ್ಲಿ ಲಸಿಕೆ ಕಂಡುಹಿಡಲಾಗಿದೆ.
ಹೊರದೇಶಗಳಿಗೂ ಲಸಿಕೆ ಸರಬಾರಾಜು ಮಾಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿ ಹೊಂದುತ್ತಿದ್ದು ಭದ್ರ ಮೇಲ್ದಂಡ ಯೋಜನೆ, ವೈದ್ಯಕೀಯ ವಿಜ್ಞಾನ ಕಾಲೇಜು, ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಯೋಜನೆ ಜಾರಿ ಗೊಳಿಸಲಾಗುತ್ತಿದೆ.
ಸರ್ಕಾರದಿಂದ ರೈತರಿಗಾಗಿ ಹಲವು ಯೋಜನೆ ಹಾಕಿಕೊಳ್ಳಲಾಗಿದೆ. ರೈತ ವಿದ್ಯಾನಿಧಿ ಮೂಲಕ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಕೃಷಿ ವಿ.ವಿ.ಗಳಲ್ಲಿ ರೈತರ ಮಕ್ಕಳಿಗೆ ಶೇ.50 ರಷ್ಟು ಸ್ಥಾನ ಮೀಸಲು ಇಡಲಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳು ರೈತಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಈ ಮೂಲಕ ಗರಿಷ್ಠ 5 ಎಕರೆ ವರೆಗೆ ರೈತರು ಬಳಸುವ ಡಿಸೆಲ್ಗೆ ಸಹಾಯಧನ ಒದಗಿಸಲಾಗುವುದು. ಚಿತ್ರದುರ್ಗ ಜಿಲ್ಲೆಯಲ್ಲಿ 200 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲಾಗಿದೆ.ಇಲ್ಲಿ ರೈತರಿಗೆ ಪಹಣಿ ಸೇರಿದಂತೆ ಹಲವು ಸೇವೆಗಳನ್ನು ನೀಡಲಾಗುವುದು. ಆರೋಗ್ಯ ಸೇವೆ ಜನರಿಗೆ ತಲುಪಿಸಲು ನಮ್ಮ ಕ್ಲೀನಿಕ್ ತೆರೆಯಲಾಗಿದೆ. ಜಿಲ್ಲೆಯ ಕೆರೆಗಳನ್ನು ತುಂಬಿಸಿ ರೈತರ ಕಣ್ಣೀರು ಒರೆಸು ಕೆಲಸ ಮಾಡಲಾಗಿದೆ ಎಂದರು.
ಆಕರ್ಷಕ ಪಥ ಸಂಚಲನ
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜರುಗಿದ ಪಥ ಸಂಚಲನದಲ್ಲಿ ನಾಗರಿಕ ಪೊಲೀಸ್, ಗೃಹರಕ್ಷಕ, ಅಬಕಾರಿ, ಅರಣ್ಯ, ಎನ್.ಸಿ.ಸಿ, ಸೇವಾದಳ, ಸ್ಕೌಟ್ಸ್ ಮತ್ತು ಗೈಟ್ಸ್, ಮೊರಾರ್ಜಿ ದೇಸಾಯಿ ಸೇರಿದಂತೆ ನಗರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರ ವಿದ್ಯಾರ್ಥಿಗಳು ರಾಷ್ಟ್ರದ ವೈವಿಧ್ಯತೆ ಹಾಗೂ ಭಾವೈಕ್ಯತೆ ಸಾರುವ ನೃತ್ಯ ರೂಪಕಗಳನ್ನು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶಿಸಿದರು. ಇದಕ್ಕೂ ಮುನ್ನ ಜಿಲ್ಲೆಯ 14 ಸಾಧಕರನ್ನು ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಯಿತು.
ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರ ಸಭೆ ಅಧ್ಯಕ್ಷೆ ತಿಪ್ಪಮ್ಮ, ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ, ಜಿ.ಪಂ. ಸಿಇಓ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್,ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಧಿಕಾರಿ ಆರ್.ಚಂದ್ರಯ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಕುಮಾರಸ್ವಾಮಿ, ಜಂಟಿ ಕೃಷಿ ನಿರ್ದೇಶಕ ಪಿ.ರಮೇಶ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಜಿ.ಪಂ.ಉಪಕಾರ್ಯದರ್ಶಿ ರಂಗಸ್ವಾಮಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ನಗರ ಸಭೆ ಆಯುಕ್ತ ಸತೀಶ್ ರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
The post ಚಿತ್ರದುರ್ಗದಲ್ಲಿ ಸಂಭ್ರಮದ 74ನೇ ಗಣರಾಜ್ಯೋತ್ಸವ : ಭಿನ್ನತೆಯಲ್ಲಿ ಏಕತೆ ಸಾಧಿಸಿದ ರಾಷ್ಟ್ರ ಭಾರತ : ಕೃಷಿ ಸಚಿವ ಬಿ.ಸಿ.ಪಾಟೀಲ್ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/OMo3qXH
via IFTTT