ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ಆಕ್ರೋಶ: ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.

ಚಿತ್ರದುರ್ಗ, ಮೇ. 30

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಎಸ್‍ಐಆರ್. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಚುನಾವಣಾ ಆಯೋಗ ನಿಲ್ಲಿಸುವಂತೆ ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯ ಮಂತ್ರಿಗೆ ಮನವಿ ಸಲಿಸಲಾಯಿತು. ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಚುನಾವಣಾ ಆಯೋಗದ ಮತ ಪಟ್ಟಿ ಪರಿಷ್ಕರಣೆಯ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಜೆ.ಯಾದವರೆಡ್ಡಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಲು ಹೊರಟಿರುವ ಕೇಂದ್ರ ಚುನಾವಣಾ ಆಯೋಗದಿಂದ ಸಣ್ಣ ಪುಟ್ಟ ತಪ್ಪುಗಳನ್ನು ಹುಡುಕಿ ಅರ್ಹ ಮತದಾರರನ್ನು ಮತಪಟ್ಟಿಯಿಂದ ಹೊರ ಹಾಕುವ ಕೆಲಸವಾಗುತ್ತಿದೆ. ಅನೇಕ ರಾಜ್ಯಗಳಲ್ಲಿ ಈಗಾಗಲೆ ಪರಿಷ್ಕರಣೆಯಾಗಿರುವುದರಿಂದ ಹನ್ನೆರಡು ಕೋಟಿ ಮತದಾರರು ಮತ ಪಟ್ಟಿಯಿಂದ ವಂಚಿತರಾಗಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿರುವುದು ಕೂಡಲೆ ನಿಲ್ಲಬೇಕು. ದೇಶದ ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಅರಿವು ಮೂಡಿಸುತ್ತ ಬರುತ್ತಿದ್ದ ಸರ್ಕಾರ ಏಕಾಏಕಿ ಚುನಾವಣಾ ಆಯೋಗವನ್ನು ಬಳಸಿಕೊಂಡು ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮತದಾರರನ್ನು ಗುರಿಯಾಗಿಸಿಕೊಂಡು ಮತ ಪಟ್ಟಿಯಿಂದ ಹೊರತೆಗೆಯುವ ಹುನ್ನಾರ ನಡೆಸುತ್ತಿದೆ. ಚುನಾವಣಾ ಆಯೋಗ ಮತಪಟ್ಟಿ ಪರಿಷ್ಕರಣೆಯನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ನಿಜವಾದ ಮತದಾರರ ಹೆಸರುಗಳು ಮತಪಟ್ಟಿಯಲ್ಲಿ ಇಲ್ಲವಾದರೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ. ಬಹುಮುಖ್ಯವಾಗಿ ರೇಷನ್ ಕಾರ್ಡ್‍ಗಳು ಇಲ್ಲದಂತಾಗುತ್ತದೆ. ಬ್ಯಾಂಕ್ ಅಕೌಂಟ್ ಹ್ಯಾಕ್ ಆಗುತ್ತದೆ. 324 ವಿಧಿ ಪ್ರಕಾರ ಚುನಾವಣಾ ಆಯೋಗಕ್ಕೆ ಮತಪಟ್ಟಿ ಪರಿಷ್ಕರಣೆ ಮಾಡುವ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ಹೇಳಿರುವುದಕ್ಕೆ ನಮ್ಮದೇನು ಅಭ್ಯಂತರವಿಲ್ಲ. ಆದರೆ ಇಲ್ಲಸಲ್ಲದ ಕಾರಣಗಳನ್ನು ಹುಡುಕಿ ಅರ್ಹರನ್ನು ಮತಪಟ್ಟಿಯಿಂದ ಹೊರ ಹಾಕುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿರುವುದನ್ನು ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಬಡವರು, ಅಲ್ಪಸಂಖ್ಯಾತರು, ಮಹಿಳೆಯರು, ದಲಿತರ ಮತಗಳನ್ನು ಹರಣ ಮಾಡಲು ಹೊರಟಿದೆ. ಮತಪಟ್ಟಿಯಲ್ಲಿ ಏನಾದರೂ ತಪ್ಪುಗಳು, ಲೋಪದೋಷಳಿದ್ದರೆ ಸರಿಪಡಿಸಿಕೊಳ್ಳಲು ಮತದಾರರಿಗೆ ಕಾಲಾವಕಾಶ ನೀಡಬೇಕು. ಅದನ್ನು ಬಿಟ್ಟು ಏಕಾಏಕಿ ಎಸ್‍ಐಆರ್. ಮೂಲಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಹೊರಟಿರುವುದು ಸಂವಿಧಾನ ಬಾಹಿರ ಎಂದು ಹೇಳಿದರು.

ನ್ಯಾಯವಾದಿ ಸಿ.ಶಿವುಯಾದವ್ ಮಾತನಾಡಿ ಈ ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಯೂ ಭಾರತದ ನಿವಾಸಿ ಎನ್ನುವುದನ್ನು ಸಾಬೀತು ಪಡಿಸುವ ಅಧಿಕಾರ ಚುನಾವಣಾ ಆಯೋಗಕ್ಕಿಲ್ಲ. ಎಸ್‍ಐಆರ್.ಮೂಲಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವುದರ ಹಿಂದೆ ಕೇಂದ್ರ ಸರ್ಕಾರದ ಕುತಂತ್ರವಿದೆ. ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಕಾನೂನು ಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ ಮಾತನಾಡಿ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿರುವ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ನಿಜವಾದ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಕೆಲಸ ಮಾಡುತ್ತಿದೆ. ಇದರಿಂದ ಸಂವಿಧಾನ ನೀಡಿರುವ ಮತದಾನದ ಹಕ್ಕಿಗೆ ಅರ್ಥವಿಲ್ಲದಂತಾಗಿದೆ. ದೇಶದ ಪ್ರತಿಯೊಬ್ಬ ನಾಗರೀಕನೂ ಈ ಕುರಿತು ಗಂಭೀರವಾಗಿ ಚಿಂತಿಸಬೇಕಿದೆ ಎಂದು ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ನಜ್ಮತಾಜ್, ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೋಹಿದ್ದೀನ್, ಸೈಯದ್ ಖುದ್ದೂಸ್, ಪಿ.ಬಾಬು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತ ನಂದಿನಿಗೌಡ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ಬಸಮ್ಮ, ನಗರಸಭೆ ಮಾಜಿ ಸದಸ್ಯ ಸಿ.ಟಿ.ರಾಜೇಶ್, ಜನಶಕ್ತಿ ರಾಜ್ಯ ಸಮಿತಿ ಸದಸ್ಯ ಟಿ.ಶಫಿವುಲ್ಲಾ, ನಿವೃತ್ತ ಪ್ರಾಚಾರ್ಯರಾದ ಶಿವಕುಮಾರ್, ಗ್ಯಾರೆಂಟಿ ಯೋಜನೆ ಅನುಷ್ಟಾನಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಆರ್.ಶಿವಣ್ಣ, ಪುರುಷೋತ್ತಮ, ಪಿ.ಸುಬಾನುಲ್ಲಾ, ಸಮಾಜವಾದಿ ಪಾರ್ಟಿಯ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮಿಕಾಂತ್, ಗುರುನಾಥ್, ರೈತ ಮುಖಂಡರುಗಳಾದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಕೆ.ಪಿ.ಭೂತಯ್ಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ನ್ಯಾಯವಾದಿ ಮಾಲತೇಶ್ ಅರಸ್, ಮಾನವ ಬಂಧುತ್ವ ವೇದಿಕೆ ಜಿಲ್ಲಾಧ್ಯಕ್ಷೆ ಬೈಲಮ್ಮ, ಬಸವರಾಜ್, ಪ್ರಭಾವತಿ, ಸುಧಾ, ದಲಿತ ಮುಖಂಡರುಗಳಾದ ಬಿ.ರಾಜಣ್ಣ ಜೆಜೆ.ಹಟ್ಟಿ, ರಾಜಪ್ಪ, ಎಸ್.ಡಿ.ಪಿ.ಐ. ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

Leave a Reply

Your email address will not be published. Required fields are marked *