ಅಪಘಾತಗಳಿಂದ ಜೀವ ರಕ್ಷಿಸಲು ಹೆಲ್ಮೆಟ್ ಅತ್ಯಗತ್ಯ: ಚಿತ್ರದುರ್ಗದಲ್ಲಿ ವಿಶೇಷ ಜಾಗೃತಿ ಅಭಿಯಾನ.

ಚಿತ್ರದುರ್ಗ ಆ. 5

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಮೂಲಕ ತಮ್ಮ ಜೀವವನ್ನು ರಕ್ಷಿಸಿಕೊಳ್ಳಬೇಕು ಎಂದು ಪಿಎಸ್‍ಐ ವಿಶ್ವನಾಥ್ ಕರೆ ನೀಡಿದರು.

ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾ ಪೊಲೀಸ್ ಇಲಾಖೆವತಿಯಿಂದ ಮಂಗಳವಾರ ಆಯೋಜಿಸಿದ್ದ ಹೆಲ್ಮಟ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿ, ರಸ್ತೆ ಅಪಘಾತಗಳಲ್ಲಿ ತಲೆಗೆ ಗಂಭೀರ ಗಾಯಗಳಾಗುವುದನ್ನು ತಡೆಯುವಲ್ಲಿ ಹೆಲ್ಮೆಟ್ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಯಾವುದೇ ಕಾರಣಕ್ಕೂ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಬಾರದು. ಹೆಲ್ಮೆಟ್ ಧರಿಸದೆ ಸಂಚರಿಸುವ ವಾಹನಗಳನ್ನು ತಡೆದು, ಸವಾರರು ಹೊಸ ಹೆಲ್ಮೆಟ್ ಖರೀದಿಸಿದ ಬಳಿಕವೇ ವಾಹನವನ್ನು ಹಿಂತಿರುಗಿಸಲಾಗುವುದು. ಈ ಕ್ರಮ ದಂಡ ವಿಧಿಸುವ ಉದ್ದೇಶದಿಂದಲ್ಲ, ಸಾರ್ವಜನಿಕರ ಜೀವ ರಕ್ಷಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ ಅವರು. ನಿಮ್ಮ ಸುರಕ್ಷತೆ ನಿಮ್ಮ ಕುಟುಂಬದ ನೆಮ್ಮದಿಯಾಗಿದೆ. ನಿಮ್ಮನ್ನು ನಂಬಿ ಕಾಯುತ್ತಿರುವ ಹೆಂಡತಿ, ಮಕ್ಕಳು ಹಾಗೂ ತಂದೆ-ತಾಯಿಯ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಕ್ಷಣಿಕ ನಿರ್ಲಕ್ಷ್ಯದಿಂದ ಸಂಭವಿಸುವ ಅಪಘಾತಗಳು ಇಡೀ ಕುಟುಂಬವನ್ನು ಸಂಕಷ್ಟಕ್ಕೆ ತಳ್ಳಬಹುದು. ಆದ್ದರಿಂದ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು.

ಪಿಎಸ್‍ಐ ಬಸವರಾಜ ಮಾತನಾಡಿ, ಗ್ರಾಮೀಣ ಪ್ರದೇಶಗಳಿಂದ ಪ್ರತಿದಿನ ಸಾವಿರಾರು ದ್ವಿಚಕ್ರ ವಾಹನಗಳು ನಗರಕ್ಕೆ ಬರುತ್ತಿದ್ದು, ಅವುಗಳಲ್ಲಿ ಶೇ. 90ಕ್ಕೂ ಹೆಚ್ಚು ಸವಾರರು ಹೆಲ್ಮೆಟ್ ಧರಿಸದೇ ಸಂಚರಿಸುತ್ತಿದ್ದಾರೆ ಅತಿವೇಗ, ಅಜಾಗರೂಕ ಚಾಲನೆ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಯಿಂದ ಅಪಘಾತಗಳು ಹೆಚ್ಚುತ್ತಿದ್ದು, ಅನೇಕ ಅಮೂಲ್ಯ ಜೀವಗಳು ಕಳೆದುಹೋಗುತ್ತಿವೆ. ಅಥವಾ ಅಪಘಾತದಲ್ಲಿ ಸಾವಿಗೀಡಾಗುವ ಗಂಭೀರವಾಗಿ ಗಾಯಗೊಳ್ಳುವ ವ್ಯಕ್ತಿಗಳ ಕುಟುಂಬಗಳು ಆರ್ಥಿಕ ಹಾಗೂ ಮಾನಸಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣ ವಾಗುತ್ತಿದೆ. ಇಂತಹ ದುರ್ಘಟನೆಗಳನ್ನು ತಡೆಯಲು ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸುವುದು ಅಗತ್ಯ ಎಂದು ಹೇಳಿದರು.

ರಾಜ್ಯ ಸರ್ಕಾರವು ಆಗಸ್ಟ್ 1ರಿಂದ ಹೆಲ್ಮೆಟ್ ಕಡ್ಡಾಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವುದರ ಜೊತೆಗೆ ಹೆಲ್ಮೆಟ್ ಬಳಕೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಸಾರ್ವಜನಿಕರು ಪೊಲೀಸ್ ಇಲಾಖೆಯ ಈ ಕ್ರಮಕ್ಕೆ ಸಹಕರಿಸಿ ತಮ್ಮ ಹಾಗೂ ಇತರರ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು ? ಎಂದು ಮನವಿ ಮಾಡಿದರು.

ಜಾಗೃತಿ ಅಭಿಯಾನದ ವೇಳೆ ಹೆಲ್ಮೆಟ್ ಧರಿಸದ ಸವಾರರಿಗೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು. ಹೆಲ್ಮೆಟ್ ಧರಿಸುವುದರಿಂದ ಆಗುವ ಪ್ರಯೋಜನ ಗಳು ಹಾಗೂ ನಿರ್ಲಕ್ಷ್ಯದ ಪರಿಣಾಮಗಳ ಬಗ್ಗೆ ಪೊಲೀಸರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಎಸ್‍ಐಗಳಾದ ಶಿವಶಂಕರ್ ಹೇಮಣ್ಣ, ಬಸವರಾಜ ಹಾಗೂ ಸಿಬ್ಬಂದಿಗಳಾದ ಮನೋಹರ್ ಸಿ.ಎಂ., ಸ್ವಾಮಿ ಎಸ್.ಬಿ., ಚಂದ್ರನಾಯ್ಕ, ಕೋಟಿ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *