ಜೆ.ಎನ್. ಕೋಟೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಆರೋಗ್ಯ ಜಾಗೃತಿಗೆ ಕರೆ
ವರದಿ ಮತ್ತು ಫೋಟೋ ಕೃಪೆ, ರವಿ ಕೆ. ಅಂಬೇಕರ್
ಜೆ.ಎನ್. ಕೋಟೆ (ಚಿತ್ರದುರ್ಗ), ಆ.15: ಭಾರತವು ಅಭಿವೃದ್ಧಿ ಹೊಂದಿದ, ಆರೋಗ್ಯವಂತ, ಸ್ವಚ್ಛ, ಸದೃಢ ಹಾಗೂ ಆತ್ಮನಿರ್ಭರ ರಾಷ್ಟ್ರವಾಗಿ ರೂಪುಗೊಳ್ಳಲು ಪ್ರತಿಯೊಬ್ಬ ನಾಗರಿಕರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಜೆ.ಎನ್. ಕೋಟೆಯ ಆಯುಷ್ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವಿಜಯಲಕ್ಷ್ಮೀ ಪಿ. ಹೇಳಿದರು.
80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಚಿತ್ರದುರ್ಗ ತಾಲ್ಲೂಕಿನ ಜೆ.ಎನ್. ಕೋಟೆ ಗ್ರಾಮದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕೇಂದ್ರದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಇಂದಿನ ಯುವಜನತೆ ಮಾದಕ ವ್ಯಸನಗಳಿಂದ ದೂರವಿದ್ದು, ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಂಡು ದೇಶದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರ ಜೊತೆಗೆ ಕುಟುಂಬ ಹಾಗೂ ಸಮಾಜದ ಆರೋಗ್ಯದ ಬಗ್ಗೆಯೂ ಜವಾಬ್ದಾರಿ ಹೊಂದಬೇಕು ಎಂದು ಅವರು ಕರೆ ನೀಡಿದರು.
“ನನ್ನ ಆರೋಗ್ಯ—ನನ್ನ ಜವಾಬ್ದಾರಿ, ನನ್ನ ದೇಶ—ನನ್ನ ಹೆಮ್ಮೆ” ಎಂಬ ಸಂಕಲ್ಪದೊಂದಿಗೆ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಆಯುಷ್ ವೈದ್ಯಕೀಯ ಪದ್ಧತಿಗಳು ಭಾರತದ ಪಾರಂಪರಿಕ ಜ್ಞಾನ ಮತ್ತು ಆರೋಗ್ಯ ಪರಂಪರೆಯ ಪ್ರಮುಖ ಭಾಗವಾಗಿವೆ. ಯೋಗ, ಆಯುರ್ವೇದ, ನೈಸರ್ಗಿಕ ಜೀವನಶೈಲಿ, ಸಮತೋಲಿತ ಆಹಾರ ಹಾಗೂ ನಿಯಮಿತ ವ್ಯಾಯಾಮದ ಮೂಲಕ ರೋಗಗಳನ್ನು ತಡೆಗಟ್ಟುವ ಆರೋಗ್ಯಕರ ಸಮಾಜ ನಿರ್ಮಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಸ್ವಾತಂತ್ರ್ಯವೆಂದರೆ ಕೇವಲ ವಿದೇಶಿ ಆಡಳಿತದಿಂದ ಮುಕ್ತವಾಗಿರುವುದಲ್ಲ. ಪ್ರತಿಯೊಬ್ಬ ನಾಗರಿಕನಿಗೂ ಉತ್ತಮ ಆರೋಗ್ಯ, ಶಿಕ್ಷಣ, ಸ್ವಚ್ಛ ಪರಿಸರ, ಸಮಾನ ಅವಕಾಶ ಹಾಗೂ ಗೌರವಯುತ ಜೀವನ ದೊರೆಯುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಡಾ. ವಿಜಯಲಕ್ಷ್ಮೀ ಆಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಮದ ಸರ್ಕಾರಿ ಪಶು ಚಿಕಿತ್ಸಾಲಯದ ಹಿರಿಯ ಪಶುವೈದ್ಯೆ ಶ್ರೀಮತಿ ಅನ್ನಪೂರ್ಣಮ್ಮ ಮಾತನಾಡಿ, ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹೆಮ್ಮೆ ಹಾಗೂ ಸಂಭ್ರಮದಿಂದ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಪೂರ್ವಕವಾಗಿ ಸ್ಮರಿಸಬೇಕು ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ದೇಶಪ್ರೇಮ ಹಾಗೂ ಆದರ್ಶಗಳು ಪ್ರತಿಯೊಬ್ಬರಿಗೂ ಸದಾ ಸ್ಫೂರ್ತಿಯಾಗಲಿ. ಅವರ ಕನಸಿನ ಭಾರತ ನಿರ್ಮಾಣಕ್ಕೆ ಯುವಜನತೆ ಬದ್ಧತೆಯಿಂದ ಶ್ರಮಿಸಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಯೋಗ ಚಿಕಿತ್ಸಕ ರವಿ ಕೆ. ಅಂಬೇಕರ್, ಗ್ರಾಮದ ಹಿರಿಯ ಮುಖಂಡರಾದ ಚಿದಾನಂದಸ್ವಾಮಿ, ಕರಿಬಸವಪ್ಪ, ಪ್ರಸನ್ನಕುಮಾರ್, ರಾಘವೇಂದ್ರ, ನೇತ್ರಾವತಿ, ಮಂಜುಳಾದೇವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j