ಬೊಮ್ಮೇನಹಳ್ಳಿ ಗ್ರಾಮದಲ್ಲಿ ಪ್ರಜಾ ಸೇವಾ ಕಾರ್ಯಕ್ರಮ ಆಯೋಜನೆ
ಭೀಮಸಮುದ್ರ, ಸೆ. 12:
ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203
ಗ್ರಾಮೀಣ ಪ್ರದೇಶದ ಜನರು ವಿವಿಧ ಸರ್ಕಾರಿ ಸೇವೆಗಳನ್ನು ಪಡೆಯಲು ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪ್ರಜಾ ಸೇವಾ ಆಂದೋಲನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದರು.
ಬೊಮ್ಮೇನಹಳ್ಳಿ ಗ್ರಾಮದಲ್ಲಿ ಚಿತ್ರದುರ್ಗ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರು ಜಾತಿ, ಆದಾಯ, ವಾಸಸ್ಥಳ ಸೇರಿದಂತೆ ವಿವಿಧ ಪ್ರಮಾಣಪತ್ರಗಳು, ಪಿಂಚಣಿ, ಪಡಿತರ ಚೀಟಿ, ಕಂದಾಯ ದಾಖಲೆಗಳು, ಕೃಷಿ ಸೌಲಭ್ಯಗಳು ಹಾಗೂ ವಸತಿ ಯೋಜನೆಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ಈ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸುವುದು ಪ್ರಜಾ ಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ ಎಂದರು.
ಗ್ರಾಮಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು ಆಗಮಿಸಿ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸುವುದರಿಂದ ಒಂದೇ ಸ್ಥಳದಲ್ಲಿ ಹಲವು ಸರ್ಕಾರಿ ಸೇವೆಗಳ ಕುರಿತು ಮಾಹಿತಿ ಮತ್ತು ಮಾರ್ಗದರ್ಶನ ದೊರೆಯುತ್ತಿದೆ. ರೈತರು, ಮಹಿಳೆಯರು, ವೃದ್ಧರು, ವಿಕಲಚೇತನರು, ಬಡವರು ಸೇರಿದಂತೆ ವಿವಿಧ ವರ್ಗದ ಜನರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹೇಳಿದರು.
ಪ್ರಜಾ ಸೇವೆಯಲ್ಲಿ 77 ಅರ್ಜಿಗಳ ಸ್ವೀಕಾರ
ಬೊಮ್ಮೇನಹಳ್ಳಿಯಲ್ಲಿ ನಡೆದ ಪ್ರಜಾ ಸೇವಾ ಆಂದೋಲನದಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 77 ಅರ್ಜಿಗಳನ್ನು ಸ್ವೀಕರಿಸಲಾಯಿತು. ಕಂದಾಯ ಇಲಾಖೆಗೆ 38 ಅರ್ಜಿಗಳು, ಗ್ರಾಮ ಪಂಚಾಯಿತಿಗೆ 33 ಅರ್ಜಿಗಳು, ಬೆಸ್ಕಾಂಗೆ 3 ಅರ್ಜಿಗಳು, ಲೋಕೋಪಯೋಗಿ ಇಲಾಖೆಗೆ 1 ಅರ್ಜಿ, ಪಶುಸಂಗೋಪನೆ ಇಲಾಖೆಗೆ 1 ಅರ್ಜಿ ಹಾಗೂ ಕೆಎಸ್ಆರ್ಟಿಸಿಗೆ 1 ಅರ್ಜಿ ಸಲ್ಲಿಕೆಯಾಗಿವೆ. ಒಂದೇ ಸ್ಥಳದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಅಗತ್ಯ ಪರಿಹಾರ ಹಾಗೂ ಮಾರ್ಗದರ್ಶನ ನೀಡಿರುವುದು ಗ್ರಾಮಸ್ಥರಿಗೆ ಅನುಕೂಲವಾಗಿದೆ

ಸಣ್ಣ ಸಮಸ್ಯೆಗಳಿಗೂ ಆದ್ಯತೆ ಅಗತ್ಯ
ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಕೇವಲ ದೊಡ್ಡ ಯೋಜನೆಗಳಷ್ಟೇ ಸಾಕಾಗುವುದಿಲ್ಲ. ಪ್ರತಿಯೊಂದು ಗ್ರಾಮದ ಸಣ್ಣಪುಟ್ಟ ಮೂಲಭೂತ ಸಮಸ್ಯೆಗಳಿಗೂ ಸ್ಪಂದಿಸಿ, ಜನರಿಗೆ ಅಗತ್ಯವಿರುವ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ ತಲುಪಿಸುವ ಮೂಲಕವೇ ಸಮಗ್ರ ಗ್ರಾಮೀಣ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು.
ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪ, ಸರ್ಕಾರಿ ಶಾಲೆ, ಅಂಗನವಾಡಿ, ಆರೋಗ್ಯ ಸೇವೆ, ಕೃಷಿ, ಪಶುಸಂಗೋಪನೆ, ನಿವೇಶನ ಹಾಗೂ ವಸತಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಪ್ರಜಾ ಸೇವಾ ಆಂದೋಲನ ವೇದಿಕೆಯಾಗಿದೆ ಎಂದರು.
ತಿಂಗಳಿಗೆ ನಾಲ್ಕು ಬಾರಿ ಕಾರ್ಯಕ್ರಮ
ತಹಸೀಲ್ದಾರ್ ಗೋವಿಂದರಾಜು ಮಾತನಾಡಿ, ಪ್ರಜಾ ಸೇವಾ ಆಂದೋಲನವನ್ನು ತಿಂಗಳಿಗೆ ನಾಲ್ಕು ಬಾರಿ, ಪ್ರತಿ ಶನಿವಾರ ಹೋಬಳಿ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ಸೂರಿನಡಿ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಹಾಗೂ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಸರ್ಕಾರಿ ಸೇವೆಗಳನ್ನು ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಬದಲು ಆಡಳಿತವೇ ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸುವ ವ್ಯವಸ್ಥೆ ರೂಪುಗೊಂಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ
ಪ್ರಜಾ ಸೇವಾ ಆಂದೋಲನದ ಅಂಗವಾಗಿ ಕಾರ್ಮಿಕ ಇಲಾಖೆ, ವಿಕಲಚೇತನರ ಇಲಾಖೆ ಹಾಗೂ ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಣ್ಣ, ತಾಲೂಕು ಪಂಚಾಯಿತಿ ಇಒ ವೈ. ರವಿಕುಮಾರ್, ಗ್ರೇಡ್-2 ತಹಶೀಲ್ದಾರ್ ನಾಗರಾಜ್, ಬಿಇಒ ಗಿರಿಜಾ, ಭದ್ರಾ ಮೇಲ್ದಂಡೆ ಯೋಜನೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಕುಮಾರ್, ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j