ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಬೆಂಗಳೂರು, ಡಿ 30
ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ನಾಲ್ಕು ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪಪ್ಪಿ ಅವರಿಗೆ ಹೊಸ ವರ್ಷದ ಮುನ್ನವೇ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅಕ್ರಮ ಬೆಟ್ಟಿಂಗ್ಗೆ ಸಂಬಂಧಿಸಿದಂತೆ ದಾಳಿ ನಡೆಸಿದ್ದ ಇಡಿ , ನಂತರ ಅವರನ್ನು ಬಂಧಿಸಿತ್ತು. ಇಡಿ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ.
ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೋರ್ಟ್ ಜಾಮೀನು ನೀಡಿದೆ. ಆ ಮೂಲಕ ಕಳೆದ 4 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಾಸಕರಿಗೆ ಹೊಸ ವರ್ಷದ ಹೊತ್ತಲ್ಲಿ ನ್ಯಾಯಾಲಯದಿಂದ ಶುಭಸುದ್ದಿ ಸಿಕ್ಕಿದೆ.
ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ದಾಳಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು, ಚಿತ್ರದುರ್ಗ, ಹುಬ್ಬಳ್ಳಿ, ಗೋವಾ, ಮುಂಬೈ ಸೇರಿದಂತೆ ಪಪ್ಪಿಗೆ ಸಂಬಂಧಿಸಿದ ಎಲ್ಲ ಸ್ಥಳಗಳ ಮೇಲೆ ರೇಡ್ ನಡೆದಿತ್ತು. ಸತತ 18 ಗಂಟೆಗೂ ಹೆಚ್ಚು ಕಾಲ ಪರಿಶೀಲಿಸಿದ್ದ ಅಧಿಕಾರಿಗಳು, ಕೆ.ಸಿ.ವೀರೇಂದ್ರ ಪಪ್ಪಿ ಮನೆಯಲ್ಲಿ ಕೋಟ್ಯಂತರ ರೂಪಾಯಿ ನಗದು, ವಿದೇಶಿ ಕರೆನ್ಸಿ ಸೇರಿದಂತೆ ಚಿನ್ನಾಭರಣ ಮತ್ತು ವಾಹನಗಳನ್ನು ಜಪ್ತಿ ಮಾಡಿದ್ದರು. ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಬೆಲ್ಲಾಜಿಯೊ ಕ್ಯಾಸಿನೊ, ಮರೀನಾ ಕ್ಯಾಸಿನೊ, ಕ್ಯಾಸಿನೊ ಜ್ಯುವೆಲ್ ಹೀಗೆ ಅಂತಾರಾಷ್ಟ್ರೀಯ ಕ್ಯಾಸಿನೊ ಸದಸ್ಯತ್ವ, ವಿವಿಧ ಬ್ಯಾಂಕ್ಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ಗಳು, ತಾಜ್, ಹಯಾತ್, ಲೀಲಾ ಐಷಾರಾಮಿ ಆತಿಥ್ಯ ಸದಸ್ಯತ್ವ ಕಾರ್ಡ್ಗಳನ್ನು ಪಪ್ಪಿ ಹೊಂದಿರೋದು ದಾಳಿ ವೇಳೆ ಬಯಲಾಗಿತ್ತು. ಹೀಗಾಗಿ ವ್ಯವಹಾರ ಸಂಬಂಧ ಜಾಗ ಭೋಗ್ಯ ಪಡೆಯಲು ಸಿಕ್ಕಿಂನಾ ಗ್ಯಾಂಗ್ಟಕ್ಗೆ ತೆರಳುತ್ತಿದ್ದ ವೇಳೆಯೇ ಪಪ್ಪಿ ಅವರನ್ನು ಅರೆಸ್ಟ್ ಮಾಡಲಾಗಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕರು ಕಳೆದ ನಾಲ್ಕು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಆಗಸ್ಟ್ 22 ರಂದು ಸಿಕ್ಕಿಂನಲ್ಲಿ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಹೊಸ ವರ್ಷಕ್ಕೆ ಒಂದು ದಿನ ಮೊದಲು ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅವರಿಗೆ ಬಿಡುಗಡೆ ಬಾಗ್ಯ ದೊರೆತಿರುವುದು ಅಭಿಮಾನಿಗಳು, ಬೆಂಬಲಿಗರಲ್ಲಿ ಸಂತಸ ಮೂಡಿಸಿದೆ.
Views: 75