ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕರ್ನಾಟಕರತ್ನ ದಿವಂಗತ ಎಸ್. ನಿಜಲಿಂಗಪ್ಪ ಅವರ ಚಿತ್ರದುರ್ಗದ ಮನೆಯನ್ನು ಸರ್ಕಾರದಿಂದ ಖರೀದಿಸಿ ಸ್ಮಾರಕವಾಗಿ ಸಂರಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಈ ಸಂಬಂಧ ಇಂದು ಸಿಎಂ ಜೊತೆ ಮಾತುಕತೆ ನಡೆಸಿದ್ದು, ನಿಜಲಿಂಗಪ್ಪನವರ ಮನೆಯನ್ನು ಖರೀದಿಸಿ, ನವೀಕರಿಸಿ ಅದನ್ನು ಸ್ಮಾರಕವಾಗಿ ಕಾಪಾಡಲು 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.
ನಿಜಲಿಂಗಪ್ಪ ಅವರು ಏಕೀಕರಣದ ಬಳಿಕ ಮೈಸೂರು ರಾಜ್ಯದ (ಕರ್ನಾಟಕ) ಪ್ರಥಮ ಮುಖ್ಯಮಂತ್ರಿಗಳಾಗಿದ್ದು, ತಮ್ಮ ಸರಳ, ಸಜ್ಜನಿಕೆಯಿಂದ ಇಡೀ ರಾಜ್ಯದ ಜನಮನ ಗೆದ್ದಿದ್ದರು. ಅವರ ಮನೆಯನ್ನು ಸ್ಮಾರಕ ಮಾಡುವುದಾಗಿ ಈ ಹಿಂದೆಯೇ ಸರ್ಕಾರ ಘೋಷಿಸಿತ್ತು. ಈಗ ಆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
Views: 0