‘ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ?’: ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಗೊಳಿಸಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ವಿದ್ಯುತ್ ದರ ಹೆಚ್ಚಳ ಬಗ್ಗೆ ಐಟಿ ಮತ್ತು ಇಎಸ್‌ಡಿಎಂ ವಲಯಗಳ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ ಮುಖ್ಯಸ್ಥರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮಾತುಕತೆ ನಡೆಸಿದರು.

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳವಾಗಿರುವ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ವೇಳೆ ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ, ಬಿಕ್ಕಟ್ಟಿಗೆ ಸಿಲುಕಿರುವ ಐಟಿ ಮತ್ತು ಇಎಸ್‌ಡಿಎಂ ವಲಯಗಳ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ ಕುಮಾರಸ್ವಾಮಿ ಅವರ ಅಹವಾಲು ಸ್ವೀಕರಿಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದುಬಾರಿ ವಿದ್ಯುತ್ ದರದಿಂದ ಸಾರ್ವಜನಿಕರ ಜತೆಗೆ ಕೈಗಾರಿಕಾ ವಲಯವೂ ತೀವ್ರ ಸಂಕಷ್ಟಕ್ಕೆ ಸಿಲಿಕಿದ್ದಾರೆ. ಗ್ಯಾರಂಟಿಗಳ ಹೆಸರಿನಲ್ಲಿ ಜನರ ತುಟಿಗೆ ತುಪ್ಪ ಸವರುತ್ತಿರುವ ರಾಜ್ಯ ಸರ್ಕಾರ ವಿದ್ಯುತ್ ಮೇಲಿನ ತೆರಿಗೆಯಲ್ಲಿ ಕೊಂಚ ಕಡಿತ ಮಾಡಲಿ.

ಗೃಹಜ್ಯೋತಿ ಎಂದು ಹೇಳುತ್ತಾ ಎಲ್ಲರ ಮನೆಗಳಲ್ಲಿ ಜ್ಯೋತಿ ಬೆಳಗಿಸುವ ನಾಟಕ ಆಡುತ್ತಿರುವ ಕಾಂಗ್ರೆಸ್ ಸರಕಾರ, ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತದೆ. ಎರಡು ಪಟ್ಟು, ಮೂರು ಪಟ್ಟು ಹೆಚ್ಚು ದರ ವಿಧಿಸಿರುವ ವಿದ್ಯುತ್ ಬಿಲ್ಲುಗಳನ್ನು ನೀಡುತ್ತಿರುವುದು ಗೃಹಜ್ಯೋತಿಯೇ? ಇಲ್ಲ ಸುಡುಜ್ಯೋತಿಯೋ? ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.

ವಿದ್ಯುತ್ ದರ ವಿಚಾರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಆಟ ಆಡುತ್ತಿವೆ. ಕಾಂಗ್ರೆಸ್ ಸರಕಾರ ನೋಡಿದರೆ, ನಾವು ದರ ಜಾಸ್ತಿ ಮಾಡಿಲ್ಲ. ಹಿಂದೆ ಇದ್ದ ಬಿಜೆಪಿ ಹೆಚ್ಚಳ ಮಾಡಿದ್ದು ಎಂದು ನೆಪ ಹೇಳಿ ಜವಾಬ್ದಾರಿಯಿಂದ ಜಾಣತನದ ಪಲಾಯನ ಮಾಡುತ್ತಿದೆ. ಇವರ ನಾಟಕ ಜನರಿಗೆ ಅರ್ಥ ಆಗುತ್ತಿದೆ ಎಂದು ಹೆಚ್​ಡಿಕೆ ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಮುಂದೆ ಐಟಿ ಮತ್ತು ಇಎಸ್‌ಡಿಎಂ ಮುಖ್ಯಸ್ಥರು ಕಷ್ಟ ಹೇಳೋಕೆ ಹೋಗಿದ್ದಾರೆ. ಇವರಿಗೆ ಸಮಯ ಕೊಡಲು ಮುಖ್ಯಮಂತ್ರಿಗಳಿಗೆ ವ್ಯವಧಾನ ಇಲ್ಲ. ಇವರು ರಾಜ್ಯದಲ್ಲಿ ನೂರಾರು ಕೋಟಿ ಹೂಡಿಕೆ ಮಾಡಿದ್ದಾರೆ. ಸಾಕಷ್ಟು ಜನರಿಗೆ ಕೆಲಸ ಕೊಟ್ಟಿದ್ದಾರೆ. ಇಂಥವರು ಹೋದಾಗ ದೊಡ್ಡ ಸ್ಥಾನದಲ್ಲಿ ಕೂತವರು ಸಜ್ಜನಿಕೆಯಿಂದ ವರ್ತಿಸಬೇಕು ಎಂದ ಹೆಚ್​.ಡಿ ಕುಮಾರಸ್ವಾಮಿ, ನಾವು ಅಧಿಕಾರದಲ್ಲಿ ಇದ್ದಾಗ ಕೆಇಆರ್​ಸಿ ಬೆಲೆ ಏರಿಕೆ ಬಗ್ಗೆ ಪ್ರಸ್ತಾವನೆ ಬಂದಿತ್ತು. ಆದರೆ ದರ ಏರಿಕೆ ಮಾಡಿರಲಿಲ್ಲ ಅಂತಾರೆ ಬಿಜೆಪಿ ನಾಯಕರು. ಆದರೆ, ದರ ಏರಿಕೆ ಬಗ್ಗೆ ಕೆಇಆರ್​ಸಿ ನಿರ್ಧಾರ ಮಾಡಲು ಸಾಧ್ಯವಿಲ್ಲ. ಬೆಲೆ ಏರಿಕೆ ಬಗ್ಗೆ ಅರ್ಜಿ ಕೊಟ್ಟಾಗ ಕೆಇಆರ್​ಸಿ ತೀರ್ಮಾನ ತೆಗೆದುಕೊಳ್ಳುತ್ತದೆ. ಈಗ ನೋಡಿದರೆ ಇವರು ನೆಪ ಹೇಳಿಕೊಂಡು ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದ ಆರ್ಥಿಕತೆಗೆ ಸಣ್ಣ ಪ್ರಮಾಣದ ಕೈಗಾರಿಕೆಗಳು ದೊಡ್ಡ ಕೊಡುಗೆ ನೀಡುತ್ತಿವೆ. ಸ್ವಯಂ ಆರ್ಥಿಕ ತಜ್ಞರು ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳಿಗೆ ಇದು ಅರ್ಥ ಆಗುವುದಿಲ್ಲವೇ? ಆರಂಭದಲ್ಲಿಯೇ ಜನ ವಿರೋಧಿ, ಕೈಗಾರಿಕಾ ವಿರೋಧಿ ಕ್ರಮಗಳನ್ನು ಸರಕಾರ ಕೈಗೊಂಡರೆ ಉದ್ಯೋಗ ಸೃಷ್ಟಿ, ಹೂಡಿಕೆ ಕಥೆ ಏನು? ಇವರ ಕಷ್ಟಗಳನ್ನ ಸರಕಾರ ಕೇಳಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್ ​ನವರು ನಿನಗೂ ಫ್ರೀ ನನಗೂ ಫ್ರೀ ಅಂತ ಹೇಳಿದಾಗ ಮುಂದಿನ ಪರಿಣಾಮಗಳ ಬಗ್ಗೆ ಯೋಚನೆ ಮಾಡಬೇಕಿತ್ತು. ಜನರು ನಂಬಿ ಮತ ಹಾಕಿದರು. ಈಗ ಕಾಂಗ್ರೆಸ್ ಸರಕಾರ ವಿಶ್ವಾಸ ದ್ರೋಹ ಎಸಗಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

Source : https://m.dailyhunt.in/news/india/kannada/etvbhar9348944527258-epaper-etvbhkn/+kaangres+sarkaaraddu+gruhajyotiyo+sudujyotiyo+vidyut+terige+she+3rindha+4rashtu+kaditagolisalu+hech+di+kumaarasvaami+aagraha-newsid-n511884666?listname=newspaperLanding&topic=bangaloreurban&index=10&topicIndex=38&mode=pwa&action=click

Leave a Reply

Your email address will not be published. Required fields are marked *