ಪಾಕ್ ವಿರುದ್ಧ ಹೈವೋಲ್ಟೇಜ್ ಪಂದ್ಯ: ಸೂರ್ಯ–ಗಂಭೀರ್ ಮಾಸ್ಟರ್ ಪ್ಲಾನ್, ಅರ್ಶದೀಪ್ ಸಿಂಗ್ ಪ್ರಮುಖ ಅಸ್ತ್ರ!

ದುಬೈ: ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಇದೀಗ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಕೋಚ್ ಗೌತಮ್ ಗಂಭೀರ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಏನದು ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಏಷ್ಯಾಕಪ್ ಟೂರ್ನಿಯಲ್ಲಿ ಯುಎಇ ಎದುರು 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಇದೀಗ ಬದ್ದ ಎದುರಾಳಿ ಪಾಕಿಸ್ತಾನ ತಂಡವನ್ನ ಎದುರಿಸಲು ಸಜ್ಜಾಗಿದೆ.

ಯುಎಇ ತಂಡವನ್ನು ಮೊದಲಿಗೆ ಕೇವಲ 57 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ಆ ನಂತರ ಕೇವಲ 4.3 ಓವರ್‌ಗಳಲ್ಲಿ ಗುರಿ ತಲುಪಿದೆ.ಇದೀಗ ಭಾರತ ತಂಡವು ಗೆಲುವಿನ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ ಇದೇ ಸೆಪ್ಟೆಂಬರ್ 14ರಂದು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿದ್ದು, ಈ ಪಂದ್ಯಕ್ಕಾಗಿ ಉಭಯ ತಂಡಗಳು ಭರ್ಜರಿ ತಯಾರಿ ನಡೆಸುತ್ತಿವೆ.

ಇದೀಗ ಪಾಕ್‌ ಎದುರಿನ ಮಹತ್ವದ ಪಂದ್ಯಕ್ಕೆ ಟೀಂ ಇಂಡಿಯಾದ ಪ್ರಮುಖ ವೇಗದ ಅಸ್ತ್ರ ಅರ್ಶದೀಪ್ ಸಿಂಗ್ ಅವರನ್ನು ಕಣಕ್ಕಿಳಿಸಲು ಸೂರ್ಯ-ಗಂಭೀರ್ ಜೋಡಿ ರಣತಂತ್ರ ಹೆಣೆದಿದೆ.

ಅರ್ಶದೀಪ್ ಸಿಂಗ್ ಹೊಸ ಚೆಂಡಿನಲ್ಲಿ ಹಾಗೂ ಡೆತ್ ಓವರ್‌ನಲ್ಲಿ ಪರಿಣಾಮಕಾರಿ ದಾಳಿ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅರ್ಶದೀಪ್ ಸಿಂಗ್ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದರು.

ಪಾಕ್ ಅಪಾಯಕಾರಿ ಬ್ಯಾಟರ್‌ಗಳನ್ನು ಆರಂಭದಲ್ಲೇ ಕಟ್ಟಿಹಾಕುವ ಉದ್ದೇಶದಿಂದ, ಅರ್ಶದೀಪ್ ಸಿಂಗ್ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಮಣೆಹಾಕಲು ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ತೀರ್ಮಾನಿಸಿದೆ ಎಂದು ವರದಿಯಾಗಿದೆ.

ಭಾರತ ಸೂಪರ್ 4 ಹಂತ ಪ್ರವೇಶಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಎದುರಿನ ಪಂದ್ಯವು ಟೀಂ ಇಂಡಿಯಾ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿರುವುದರಿಂದ, ಅರ್ಶದೀಪ್ ಸಿಂಗ್ ಮೇಲೆ ಸಾಕಷ್ಟು ನಿರೀಕ್ಷೆಯಿಡಲಾಗಿದೆ.

Leave a Reply

Your email address will not be published. Required fields are marked *