
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಫೆ. 01 : ಪಂಚಗ್ಯಾರಂಟಿ ಯೋಜನೆಗಳನ್ನು ಕೇವಲ ಚುನಾವಣೆ ಪ್ರಚಾರಕ್ಕಾಗಿ ಜಾರಿ ಮಾಡಿಲ್ಲ. ರಾಜ್ಯದ ಜನರ ಅಭಿವೃದ್ಧಿ ದೂರದೃಷ್ಠಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಈ ಯೋಜನೆಗಳು ನಿಲ್ಲುವುದಿಲ್ಲ. ರಾಜ್ಯ ಸರ್ಕಾರ ಜನಪರ
ಯೋಜನೆಗಳ ಜಾರಿಗೆ ಸದಾ ಬದ್ದವಾಗಿರುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ
ಹೆಚ್.ಎಂ.ರೇವಣ್ಣ ಹೇಳಿದರು.
ಜಿಲ್ಲಾ ಸಮಿತಿಯ ನೂತನ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ
ಗಾಂಧಿಯವರ 20 ಅಂಶಗಳ ಕಾರ್ಯಕ್ರಮ ದೇಶದ ಬಡವರ ಜೀವನದಲ್ಲಿ ಸಾಕಷ್ಟು ಬದಲಾವಣೆ ತಂದಿತು. ಇವರ ನೇತೃತ್ವದಲ್ಲಿ
ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ರಕ್ತಕ್ರಾಂತಿ ಇಲ್ಲದೆಯೇ ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಜಾರಿ ಮಾಡಿ,
ಭೂ ರಹಿತರಿಗೆ ಭೂಮಿ ಹಕ್ಕು ದೊರಕಿಸಿಕೊಟ್ಟರು. ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರು ರಾಜ್ಯದ ಪದವಿಧರರಿಗೆ ಸರ್ಕಾರಿ
ನೌಕರಿ ದೊರಯುವಂತೆ ಮಾಡಿದರು. ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಅವರು ಜಾರಿ ಮಾಡಿದ ಸಿಇಟಿ ಪದ್ದತಿ, ಬಡವರ
ಮಕ್ಕಳಿಗೆ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಲಭಿಸುವಂತೆ ಮಾಡಿತು. ಮಾಜಿ ಮುಖ್ಯಮಂತ್ರಿ
ಬಂಗಾರಪ್ಪನವರು ರೈತರ ಜಮೀನಿನಲ್ಲಿರುವ 10 ಹೆಚ್.ಪಿ. ಮೋಟಾರಿನ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡಿದರು.
ಸಿದ್ಧರಾಮಯ್ಯನವರು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಜಾರಿ ಮಾಡಿದರು.
ಎರಡನೇ ಬಾರಿ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಇದರಿಂದ ಅವರನ್ನು ಭಾಗ್ಯಗಳ
ರಾಜ ಎಂದು ಕರೆಯಲಾಗುತ್ತಿದೆ. ನಮ್ಮ ಪಕ್ಷದ ಸರ್ಕಾರಗಳು ಜನರ ಜೀವನದಲ್ಲಿ ಮಹತ್ವದ ಬದಲಾವಣೆ ತರುವಂತಹ ವಿಧವಾ
ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನ, ಮನೆ ರಹಿತರಿಗೆ ಮನೆ ಸೇರಿದಂತೆ ನೂರಾರು ಯೋಜನೆಗಳನ್ನು ಜಾರಿ
ಮಾಡಿವೆ ಎಂದರು.
ರಾಜ್ಯದಲ್ಲಿ ಶಕ್ತಿ ಯೋಜನೆಯಡಿ 377 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತವಾಗಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣ
ಮಾಡಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ರೂ.9,124 ಕೋಟಿ ಖರ್ಚು ಮಾಡಿದೆ. ಗೃಹಲಕ್ಷ್ಮೀ ಯೋಜನೆಯಡಿ 1.2 ಕೋಟಿ
ಮಹಿಳೆಯರು ನೊಂದಣಿಯಾಗಿದ್ದು, ಇವರಿಗೆ ಪ್ರತಿ ಮಾಹೆ ರೂ.2000 ಹಣವನ್ನು ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮೆ
ಮಾಡಲಾಗುತ್ತಿದೆ. ಇದಕ್ಕಾಗಿ ರೂ.35,608 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಗೃಹಜ್ಯೋತಿ ರಾಜ್ಯದ ಎಲ್ಲ ಮನೆಗಳಿಗೆ 200
ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದಕ್ಕಾಗಿ ರೂ.11,810 ಕೋಟಿ ವ್ಯಯಿಸಲಾಗಿದೆ. ಯುವನಿಧಿ ಯೋಜನೆಯಡಿ 2.14
ಲಕ್ಷ ಫಲಾನುಭವಿಗಳಿಗೆ ರೂ.222 ಕೋಟಿ ಹಣ ನೀಡಲಾಗಿದೆ ಎಂದು ಹೆಚ್.ಎಂ.ರೇವಣ್ಣ ಮಾಹಿತಿ ನೀಡಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ.ಎನ್.ಹೆಗಡೆ ಮಾತನಾಡಿ ರಾಜ್ಯ ಸರ್ಕಾರ
ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ಅಸ್ಸಾಂ, ಜಾರ್ಖಂಡ್, ಮಹಾರಾಷ್ಟ್ರ, ಮಧ್ಯ
ಪ್ರದೇಶ, ತೆಲಂಗಾಣ ಸೇರಿದಂತೆ ಅನೇಕ ರಾಜ್ಯಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿದುಕೊಳ್ಳಲು ರಾಜ್ಯಕ್ಕೆ ಭೇಟಿ ನೀಡಿವೆ
ಹೇಳಿದರು.
ಗ್ಯಾರಂಟಿ ಯೋಜನೆಗಳನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಈ ಯೊಜನೆಗಳ ಜಾರಿಯಿಂದ ರಾಜ್ಯದ ಆರ್ಥಿಕತೆಯಲ್ಲಿ
ಚೇತರಿಕೆ ಕಂಡು ಬಂದಿದೆ. ಜಿಎಸ್ಟಿ ಹಾಗೂ ಜಿಡಿಪಿ ಬೆಳವಣಿಗೆಯಲ್ಲಿ ರಾಜ್ಯ ಮಂಚೂಣಿಯಲ್ಲಿದೆ. ರಾಜ್ಯದ ಜನತೆ
ಅಪಪ್ರಚಾರಗಳಿಗೆ ಕಿವಿಗೊಡಬಾರದು. ಪಕ್ಷಭೇದವಿಲ್ಲದೆ ಎಲ್ಲಾ ಜನರಿಗೂ ಯೋಜನೆಯ ಲಾಭ ದೊರೆಯುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಎಂ.ಕೆ.ತಾಜ್ಪೀರ್, ಜಿಲ್ಲಾ ಕೆ.ಡಿ.ಪಿ ಸದಸ್ಯ ಕೆ.ಸಿ.ನಾಗರಾಜ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ
ಉಪಾಧ್ಯಕ್ಷರುಗಳಾದ ಡಿ.ಎನ್.ಮೈಲಾರಪ್ಪ, ಜಿ.ಟಿ.ಬಾಬುರೆಡ್ಡಿ, ಖಾದಿ ಜೆ.ರಮೇಶ್, ಬಿ.ಟಿ.ನಿರಂಜನ ಮೂರ್ತಿ, ಸದಸ್ಯರಾದ
ನಾಗೇಶ್ ರೆಡ್ಡಿ, ಅಬ್ದುಲ್ಲಾ ಶಾ ವಲಿ, ಟಿ.ಕೃಷ್ಣಮೂರ್ತಿ, ನಾಗರಾಜ್, ಹೇಮಂತ ಯಾದವ್, ಮಹಮದ್ ಇಸ್ಮಾಯಿಲ್, ಎ.ಲೋಹಿತ್,
ಕೆ.ಎ.ತಿಪ್ಪೇಶ್, ಎಲ್.ಇಂದಿರಾ, ಪಿ.ಆರ್.ಶಿವಕುಮಾರ್, ಮಧುಪಾಲೇಗೌಡ, ಟಿ.ಪ್ರಕಾಶ್, ಚನ್ನಕೇಶವ, ಜಿ.ಪಿ.ಸುರೇಶ್ ಸೇರಿದಂತೆ
ತಾಲ್ಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷರು ಉಪಸ್ಥಿತರಿದ್ದರು.