ಚಿತ್ರದುರ್ಗ ಆ. 21
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ರಾಜ್ಯ ಸರ್ಕಾರವು ಪರಿಷ್ಕರಿಸಲಾಗಿರುವ ಕನಿಷ್ಠ ವೇತನವನ್ನು ಅನುಷ್ಠಾನಗೊಳಿಸಲು ವಿಳಂಬ ಧೋರಣೆ ತಾಳುತ್ತಿದ್ದು, ಈ ಕುರಿತು ಪರಿಶೀಲಿಸಲು ಸಚಿವ ಸಂಪುಟದಲ್ಲಿ ಉಪ ಸಮಿತಿ ರಚಿಸಿರುವುದಕ್ಕೆ ಕಾರ್ಮಿಕ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಎಐಟಿಯುಸಿಯ ರಾಜ್ಯ ಉಪಾಧ್ಯಕ್ಷರಾದ ಕಾ|| ಟಿ.ಆರ್.ಉಮಾಪತಿ ರಾಜ್ಯದಲ್ಲಿ ಕನಿಷ್ಠ ವೇತನ ಅನುಷ್ಠಾನ ಮತ್ತು ಪ್ರಸ್ತುತ ಎದುರಾಗಿರುವ ಸಮಸ್ಯೆಗಳ ಕುರಿತು ಪ್ರಮುಖ ವಿಷಯಗಳನ್ನು ಹಂಚಿಕೊಂಡು ಐದು ವರ್ಷಗಳಿಗೊಮ್ಮೆ ಕನಿಷ್ಠ ವೇತನ ಪರಿಷ್ಕರಣೆ ಮಾಡಬೇಕೆಂಬ ನಿಯಮವಿದ್ದರೂ, ಕಳೆದ ಎಂಟು ವರ್ಷಗಳಿಂದ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಪ್ರಸ್ತುತ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದ ಬಳಿಕ ರಾಜ್ಯ ಸರ್ಕಾರವು ಜುಲೈ ತಿಂಗಳಿನಲ್ಲಿ ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಅಧಿಸೂಚನೆ ಹೊರಡಿಸಿತ್ತು.
ಉಚ್ಛ ನ್ಯಾಯಾಲಯದ ಆದೇಶ ಹಾಗೂ ಮಾಲೀಕರ ಅರ್ಜಿ: ಸರ್ಕಾರದ ಪರಿಷ್ಕೃತ ಆದೇಶವನ್ನು ಪ್ರಶ್ನಿಸಿ ಪ್ರಮುಖ ಕಾರ್ಖಾನೆ ಮಾಲೀಕರು ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಕಾರ್ಮಿಕ ಸಂಘಟನೆಗಳು ಸಹ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದು, ಉಚ್ಛ ನ್ಯಾಯಾಲಯವು ಪರಿಷ್ಕೃತ ವೇತನಕ್ಕೆ ಯಾವುದೇ ತಡೆಯಾಜ್ಞೆ ನೀಡಿಲ್ಲ. ಪ್ರಕರಣದ ವಿಚಾರಣೆಯನ್ನು ಆರು ವಾರಗಳ ಕಾಲ ಮುಂದೂಡಿದೆ. ಕೆಪಿಟಿಸಿಎಲ್ ಕಾರ್ಮಿಕ ಇಲಾಖೆ ಹಾಗೂ ಬೆಂಗಳೂರು ಜಲಮಂಡಳಿ ಸೇರಿದಂತೆ ಹಲವು ಸರ್ಕಾರಿ ಇಲಾಖೆಗಳಲ್ಲಿ ನೂತನ ಕನಿಷ್ಠ ವೇತನ ಅನುಷ್ಠಾನಕ್ಕೆ ಅನುದಾನವಿಲ್ಲವೆಂಬ ನೆಪ ಹೇಳಲಾಗುತ್ತಿದೆ ಎಂದು ದೂರಿದರು.
ಎಐಟಿಯುಸಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾ|| ಜೆ.ಸಿ.ಸುರೇಶ್ ಬಾಬು ಮಾತನಾಡಿ, ರಾಜ್ಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಹೊರಗುತ್ತಿಗೆ ಕಾರ್ಮಿಕರಿದ್ದಾರೆ. ಇವರಿಗೆ ಕನಿಷ್ಠ ವೇತನ ಹೆಚ್ಚಿಸುವು ದರಿಂದ ಸರ್ಕಾರಕ್ಕೆ ವರ್ಷಕ್ಕೆ ಸುಮಾರು 1,500 ಕೋಟಿ ಹೆಚ್ಚುವರಿ ಹೊರೆಯಾಗಲಿದೆ ಎಂದು ನೆಪ ಹೇಳಲಾ ಗುತ್ತಿದೆ. ಆದರೆ, ಏಳನೇ ವೇತನ ಆಯೋಗದ ಜಾರಿಯಿಂದ ಸರ್ಕಾರಿ ಕಾಯಂ ನೌಕರರಿಗೆ 20,000 ಕೋಟಿ ಹೆಚ್ಚುವರಿ ವೆಚ್ಚ ಭರಿಸಲು ಸರ್ಕಾರ ಒಪ್ಪಿಕೊಂಡಿದೆ. ಬಡ ಕಾರ್ಮಿಕರ ವಿಷಯದಲ್ಲಿ ಮಾತ್ರ ಅನುದಾನದ ಕೊರತೆ ನೆಪ ಹೇಳುತ್ತಿರುವುದು ಕಾನೂನಿನ ಉಲ್ಲಂಘನೆಯಾಗಿದೆ. ಸರ್ಕಾರವು ತಕ್ಷಣವೇ ಪರಿಷ್ಕೃತ ಕನಿಷ್ಠ ವೇತನವನ್ನು ಎಲ್ಲ ಇಲಾಖೆ ಹಾಗೂ ಕಾರ್ಖಾನೆಗಳಲ್ಲಿ ಜಾರಿಗೆ ತರಬೇಕು. ಜಿ. ಪರಮೇಶ್ವರ್ ನೇತೃತ್ವದ ಸಮಿತಿಯು ಕನಿಷ್ಠ ವೇತನದಲ್ಲಿ ಯಾವುದೇ ಕಡಿತ ಅಥವಾ ಮಾರ್ಪಾಡು ಮಾಡಲು ಯತ್ನಿಸಿದರೆ, ಎಐಟಿಯುಸಿ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಾಗೂ ‘ಬೆಂಗಳೂರು ಚಲೋ’ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಐಟಿಯುಸಿ ಕಾರ್ಮಿಕ ಸಂಘಟನೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಪತ್ರಿಕಾ ಗೋಷ್ಟಿಯಲ್ಲಿ ಎಐಟಿಯುಸಿಯ ಅಧ್ಯಕ್ಷರಾದ ಕಾ|| ಬಿ.ಬಸವರಾಜು, ಸತ್ಯಕೀರ್ತಿ, ಸಾವಿತ್ರಮ್ಮ, ಪರಿವಿನ್ ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j